*ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ*
ಚಾಮರಾಜನಗರ:ಪ್ರತಿಯೊಬ್ಬ ವಿದ್ಯಾರ್ಥಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು, ಕಲಿಕೆಯಲ್ಲಿ ಹಿನ್ನೆಡೆ ಕಂಡಿರುವ ಮಕ್ಕಳ ಕಲಿಕಾ ಸಾಮಥ್ರ್ಯ ಹೆಚ್ಚಳಕ್ಕೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿಂದು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಸುಧಾರಣಾ ಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಮಾರ್ಗದರ್ಶನ ಕುರಿತು ನಡೆದ ‘ಜಿಲ್ಲಾಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ಕ್ಷೇತ್ರದಲ್ಲಿಯೂ ಒತ್ತಡ ಇರುವಂತೆ ಶಿಕ್ಷಣ ಕ್ಷೇತ್ರದಲ್ಲಿಯೂ ಒತ್ತಡದ ಪರಿಸ್ಥಿತಿ ಇದೆ. ತಂದೆ ಅಥವಾ ತಾಯಿ ಇಲ್ಲದ (ಸಿಂಗಲ್ ಪೇರೆಂಟ್) ಮಕ್ಕಳು, ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಸಾಮಾಜಿಕ ಸಮಸ್ಯೆ, ಕಲಿಕೆಗೆ ಅವಶ್ಯವಾದ ಮೂಲಸೌಲಭ್ಯಗಳಿಲ್ಲದಿರುವುದು ಸೇರಿದಂತೆ ಇತರೆ ಕಾರಣಗಳಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಲಿದೆ. ಈ ಎಲ್ಲಾ ಸಮಸ್ಯೆಗಳನ್ನು ಮೀರಿ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸಬೇಕಾದ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಬ್ಬ ಶಿಕ್ಷಕರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಪೋಷಕರನ್ನು ಸಹ ಪ್ರೇರೇಪಿಸುವ ಕೆಲಸ ಆಗಬೇಕಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ-1, 2 ಮತ್ತು 3ರ ಪರೀಕ್ಷೆಗಳಲ್ಲಿ ಚಾಮರಾಜನಗರ ತಾಲೂಕು ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿನ ಫಲಿತಾಂಶ ತೃಪ್ತಿಕರವಾಗಿದೆ. ಜಿಲ್ಲಾ ಕೇಂದ್ರವಾಗಿರುವ ಚಾಮರಾಜನಗರ ಫಲಿತಾಂಶದಲ್ಲಿ ಸಾಕಷ್ಟು ಹಿನ್ನೆಡೆ ಅನುಭವಿಸಿದೆ. ಇದು ಬದಲಾಗಬೇಕು. ಪೋಷಕರ ಸಹಕಾರ ಹಾಗೂ ಮಕ್ಕಳ ಬುದ್ಧಿಶಕ್ತಿಯ ರಚನೆ ವಿಶ್ಲೇಷಣೆಯಾಗಬೇಕು. ಕಲಿಕೆಯಲ್ಲಿ ಹಿನ್ನೆಡೆ ಕಂಡಿರುವ ಪ್ರತಿ ಮಕ್ಕಳನ್ನು ಸೂಕ್ಷ್ಮವಾಗಿ ಗಮನಿಸಿ ಶಿಕ್ಷಕರು ಪರಿಶೀಲಿಸಬೇಕು. ಎಲ್ಲಿ, ಏನು ಕೊರತೆಯಾಗಿದೆ ಎಂಬುದು ಅಲ್ಲಿ ಅರಿವಾಗಲಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಆಧಿಕಾರಿಗಳು ಮುಂದಾಗುವಂತೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಶಿಕ್ಷಣ ಕ್ಷೇತ್ರದ ಬಗ್ಗೆ ತುಂಬಾ ಗೌರವವಿದೆ. ಶಿಕ್ಷಕರ ಜವಾಬ್ದಾರಿಯ ಅರಿವು ನಮಗೂ ಇದೆ. ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸವಾಲನ್ನು ಸವಾಲಾಗಿಯೇ ತೆಗೆದುಕೊಳ್ಳಬೇಕು. ಕಠಿಣ ಪರಿಶ್ರಮ ಹಾಕಬೇಕು. ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ರೂಪಿಸಿ ಶೈಕ್ಷಣಿಕವಾಗಿ ಮುನ್ನೆಡೆಯಬೇಕು. ಎಲ್ಲರೂ ಸೇರಿ ಪರೀಕ್ಷಾ ಸವಾಲನ್ನು ಸಮನಾಗಿ ಸ್ವೀಕರಿಸೋಣ. ಶಿಕ್ಷಕರು ಯಶಸ್ವಿಯಾದರೇ ಮಾತ್ರ ಉತ್ತಮ ಫಲಿತಾಂಶ ಬರಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲೆಯಲ್ಲಿ ಮಕ್ಕಳ ಕಲಿಕಾ ಸುಧಾರಣೆಗೆ ಅಗತ್ಯವಿರುವ ಮೂಲಸೌಲಭ್ಯಗಳು, ವಸತಿ ವ್ಯವಸ್ಥೆ, ಕಲಿಕಾ ವಾತಾವರಣ, ಪ್ರಶ್ನೆಪತ್ರಿಕೆಗಳ ಬ್ಲೂ ಪ್ರಿಂಟ್ ಒದಗಿಸಲು ಆಧ್ಯತೆ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳ ವಸತಿ ಶಾಲೆಗಳಿಗೆ ಆಯಾ ಇಲಾಖೆ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಕಲಿಕಾ ಹಿನ್ನಡೆ ಕಂಡುಬಂದಿರುವ ಮಕ್ಕಳು, ಶಿಕ್ಷಕರು, ಪೋಷಕರೊಂದಿಗೆ ಸಂವಾದ ನಡೆಸಿ ಫಲಿತಾಂಶ ಹೆಚ್ಚಳಕ್ಕೆ ಪ್ರೇರೇಪಿಸಲಾಗುವುದು. ಒಟ್ಟಾರೆ ಮಕ್ಕಳ ಕಲಿಕಾ ಸಾಮಥ್ರ್ಯ ವೃದ್ಧಿಗೆ ಶಿಕ್ಷಣ ಇಲಾಖೆ ಕೈಗೊಳ್ಳುವ ಸುಧಾರಣಾ ಕ್ರಮಗಳಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಫಲಿತಾಂಶದಲ್ಲಿ ಹಿನ್ನಡೆಯಾಗಿರುವ ಶಾಲೆಗಳಲ್ಲಿ ಮುಖ್ಯವಾಗಿ ಯಾವ ವಿಷಯಗಳ ಕಲಿಕೆಯಲ್ಲಿ ಮಕ್ಕಳು ಹಿಂದೆ ಉಳಿದಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು. ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಇಲಾಖೆ ಅಳವಡಿಸಿಕೊಂಡಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಉತ್ತಮ ಫಲಿತಾಂಶ ನೀಡುವಂತೆ ಪ್ರೇರೇಪಿಸಬೇಕು. ಶಾಲೆಗೆ ಗೈರು ಹಾಜರಿ, ಸರಾಸರಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಪೋಷಕರಿಗೆ ಅರಿವು ಮೂಡಿಸಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಶೈಕ್ಷಣಿಕ ವರ್ಷ ಆರಂಭದಿಂದಲೂ ಬಹಳ ಆಸಕ್ತಿ ವಹಿಸಿ ಮಕ್ಕಳ ಕಲಿಕಾ ವೃದ್ಧಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಜಿಲ್ಲೆಯು ಅಳವಡಿಸಿಕೊಂಡಿರುವ 14 ಹಾಗೂ 20 ಅಂಶಗಳ ಕಾರ್ಯಕ್ರಮಗಳ ಅಂಶಗಳನ್ನು ಜಿಲ್ಲಾಧಿಕಾರಿಯವರು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಜಿಲ್ಲೆಯ ಕುಂದು ಕೊರತೆಗಳನ್ನು ಪರಿಹರಿಸಲು ಮುಂದಾಗಿದ್ದಾರೆ. ಕಳೆದ ಬಾರಿಯ ನ್ಯೂನತೆಗಳನ್ನು ಸರಿಪಡಿಸಿಕೊಂಡು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಫಲಿತಾಂಶ ನೀಡಲು ಎಲ್ಲರ ಪರಿಶ್ರಮ ಅವಶ್ಯವಾಗಿದೆ ಎಂದರು.
ಇದೇ ವೇಳೆ ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದ ಜಿಲ್ಲೆಯ 9 ಶಾಲೆಗಳ ಮುಖ್ಯ ಶಿಕ್ಷಕರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.
ಡಯಟ್ ಪ್ರಾಂಶುಪಾಲರಾದ ಕಾಶೀನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹನುಮಶೆಟ್ಟಿ, ಟಿ.ಆರ್. ಸ್ವಾಮಿ, ಮಂಜುಳ, ಗುರುಲಿಂಗಯ್ಯ, ಯಳಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಂಜುಂಡಯ್ಯ, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು
ವರದಿ ಆರ್ ಉಮೇಶ್ ಮಲಾರಪಾಳ್ಯ