ಭಾಶೆಟ್ಟಿ ಹಳ್ಳಿ ಪಟ್ಟಣ ಪಂಚಾಯ್ತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಬಾಶೆಟ್ಟಿಹಳ್ಳಿ ಕೆರೆ ಅಂಗಳದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಶಾಲಾ ಮಕ್ಕಳೊಂದಿಗೆ ಗಿಡ ನೆಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವಿವಿಧ ರೀತಿಯ ವೇಷ ಧರಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವನ್ನು ನೀಡಿದ ರೀತಿ ವಿಶೇಷವಾಗಿತ್ತು.

ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಮಾತನಾಡಿ ಈ ಬಾರಿಯ ವಿಶ್ವ ಪರಿಸರ ದಿನಾಚರಣೆ ವಿಶೇಷವಾಗಿದ್ದು, ಈ ವರ್ಷ ತಾಲೂಕಿನ ಹುಲಿಕುಂಟೆ ಟೋಲ್ 10 ಕಿ.ಮೀಗಳ ಉದ್ದದವರೆಗೂ ಅರಣ್ಯ ಇಲಾಖೆ ವತಿಯಿಂದ ವಿವಿಧ ರೀತಿಯ ಸಸಿಗಳನ್ನು ನೆಡುವ ಕಾರ್ಯಕ್ರಮ ಪೂರ್ಣಗೊಂಡಿರುವುದು ಸಂತಸ ತಂದಿದೆ . ಅಲ್ಲದೆ ಶಾಲಾ ಮಕ್ಕಳು ಪರಿಸರ ಸಂರಕ್ಷಣೆ ಕುರಿತುಂತೆ ವಿಶೇಷವಾಗಿ ಜಾಗೃತಿ ಮೂಡಿಸಲು ಮುಂದಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ , ಗಿಡ ಮರ ಸಸಿಗಳನ್ನು ರಕ್ಷಣೆ ಮಾಡುವ ಮೂಲಕ ಪ್ರತಿನಿತ್ಯವೂ ಆಚರಿಸುವಂತಾಗಲಿ ಎಂದರು.

ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ನರಸಿಂಹಮೂರ್ತಿ ಮಾತನಾಡಿ ಸ್ಥಳೀಯ ಶಾಸಕರ ಮಾರ್ಗದರ್ಶನ ಹಾಗೂ ಸ್ಥಳೀಯ ಮುಖಂಡರ ಬೆಂಬಲದೊಂದಿಗೆ ಇಂದು ಕೆರೆಯಂಗಳದಲ್ಲಿ ಕಾರ್ಖಾನೆಗಳ ಸಹಭಾಗಿತ್ವದಲ್ಲಿ ವಿಶೇಷ ಸಸಿಗಳನ್ನು ನಡೆಯುವ ಮೂಲಕ ಜೀವವೈವಿಧ್ಯ ರಕ್ಷಣೆಗೆ ಮುಂದಾಗಿದ್ದೇವೆ, ಈ ಕಾರ್ಯವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನವೂ ನಡೆಯಲಿ ಎಂಬುದೇ ನಮ್ಮೆಲ್ಲರ ಆಶಯ , ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಿಸರ ಸಂರಕ್ಷಣೆ ಬಗ್ಗೆ ವಿಶೇಷವಾಗಿ ಜಾಗೃತಿ ಮೂಡಿಸಿದ ಶಾಲಾ ಮಕ್ಕಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಕೃಷ್ಣಪ್ಪ, ಪ್ರೇಮ್ ಕುಮಾರ್, ಮುನಿರಾಜಪ್ಪ, ಮುನಿನಾರಾಯಣಸ್ವಾಮಿ, ಮುನಿಚಂದ್ರ ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ನರಸಿಂಹಮೂರ್ತಿ, ಉಮಾಶಂಕರ್, ಪಟ್ಟಣ ಪಂಚಾಯಿತಿ ಸಿಬ್ಬಂಧಿವರ್ಗ, ಪೌರಕಾರ್ಮಿಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಶಾಲಾ ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.