ಜನರಿಗೆ ನೀಡಿದ ಭರವಸೆ ಈಡೇರಿಸಿ ನುಡಿದಂತೆ ನಡೆದ ಮೊದಲ ರಾಜ್ಯ ಸರ್ಕಾರ– ಸಿ.ಎಂ ಸಿದ್ದರಾಮಯ್ಯ
ಚಾಮರಾಜನಗರ:ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ಜಿಲ್ಲೆಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಐದು ಗ್ಯಾರಂಟಿ ಯೋಜನೆಗಳನ್ನು ಪ್ರತಿನಿಧಿಸುವ ಸಿರಿಧಾನ್ಯಗಳ ಜ್ಯೋತಿ ಬೆಳಗಿಸಿ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ನಂತರ ಮಾತನಾಡಿ
ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದ ಮೊದಲ ರಾಜ್ಯಸರ್ಕಾರ ನಮ್ಮದಾಗಿದೆ. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಬಡವರ, ದೀನ ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಸಬಲೀಕರಣದ ಜೊತೆಗೆ ಹಲವಾರು ಹೊಸ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಸಾಮಾಜಿಕ ಅಸಮಾನತೆ ಹೋಗಲಾಡಿಸಿ ಬುದ್ದ, ಬಸವ, ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ ಎಂದರು.
ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳ, ನಾಲ್ಕೂವರೆ ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳಿಗಾಗಿ ಈ ವರ್ಷ 36,000 ಕೋಟಿ ಹಣ ಕೊಟ್ಟಿದ್ದೇವೆ. ಮುಂದಿನ ವರ್ಷಕ್ಕೆ 59,000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ರಾಜ್ಯದ ಜನರ ಅಭಿವೃದ್ಧಿ ಕಾರ್ಯಗಳಿಗೆ ಒಂದು ಲಕ್ಷ ಇಪ್ಪತ್ತು ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ ಎಂದರು.
ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳಾಗಿದ್ದರೂ ಅಸಮಾನತೆ ಇನ್ನೂ ಜೀವಂತವಾಗಿದೆ. ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಕನಸಾಗಿಯೇ ಉಳಿದಿದೆ. ಅಸಮಾನತೆಗೆ ಮೂಲಕಾರಣ ದೇಶದಲ್ಲಿನ ಜಾತಿ ವ್ಯವಸ್ಥೆಯಾಗಿದೆ. ಅಧಿಕಾರ, ಸಂಪತ್ತು ಕೆಲವೇ ಜನರ ಬಳಿಯಿದೆ. ಅದು ಎಲ್ಲಾ ವರ್ಗದವರಿಗೂ ಸಮಾನವಾಗಿ ಹಂಚಿಕೆಯಾಗಬೇಕೆಂಬುದೇ ಸರ್ಕಾರದ ಧ್ಯೇಯೋದ್ದೇಶವಾಗಿದೆ. ಹಾಗೆಯೇ ಚಾಮರಾಜನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ತಿಳಿಸಿದರು.
ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇದು ವಿಶೇಷವಾದ ಕಾರ್ಯಕ್ರಮವಾಗಿದೆ. ಚುನಾವಣೆಗೂ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿಯೇ ಈಡೇರಿಸಿದ ಕೀರ್ತಿ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಮಹಿಳೆಯರು, ಬಡವರ, ರೈತರ ಪರವಾಗಿ ಕೆಲಸ ಮಾಡಲು ಸರ್ಕಾರ ಬದ್ಧವಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ನಮ್ಮ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದು, ಸರಾಸರಿಯಲ್ಲಿ ಮೊದಲ ಸ್ಥಾನ ಪಡೆದಿದೆ ಎಂದರು.
ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಮಾತನಾಡಿ ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಭೂತಪೂರ್ವ ಕಾರ್ಯಕ್ರಮವಾಗಿದೆ. ದೇಶದಲ್ಲಿಯೇ ನುಡಿದಂತೆ ನಡೆದ ಸರ್ಕಾರ ನಮ್ಮದು. ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಇಡೀ ರಾಜ್ಯದ ಜನರಿಗೆ ತಲುಪಿಸುವ ದಿಸೆಯಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕರು ಹಾಗೂ ಎಂ.ಎಸ್.ಐ.ಎಲ್. ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಜಿಲ್ಲೆಯ ಶೇ. 98ರಷ್ಟು ಜನರು ಪಡೆದಿದ್ದಾರೆ. ಇದು ಹೆಮ್ಮೆಯ ಸಂಗತಿ. ಕುಡಿಯುವ ನೀರು, ಕೆರೆಗಳನ್ನು ತುಂಬಿಸುವ ಯೋಜನೆ, ರಸ್ತೆಗಳು ಸೇರಿದಂತೆ ಜಿಲ್ಲೆಯ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಹೆಚ್ಚಿನ ಒತ್ತು ನೀಡಿದ್ದಾರೆ. ಪ್ರಸ್ತುತ ಜಿಲ್ಲೆಗೆ ಕುಡಿಯುವ ನೀರಿನ ಯೋಜನೆಗಾಗಿ 367 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗಿದೆ ಎಂದರು.
ಕೊಳ್ಳೇಗಾಲ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ಜನಸಾಮಾನ್ಯರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಯಾವುದೇ ತಾರತಮ್ಯವಿಲ್ಲದೆ ಸಮಾಜದ ಎಲ್ಲಾ ವರ್ಗಗಳ ಜನರಿಗೂ ಸಮತೋಲಿತ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಮನ್ನಣೆ ಗಳಿಸಿದ್ದಾರೆ. ಸರ್ಕಾರದ ಬಗ್ಗೆ ಜನರು ವಿಶ್ವಾಸ ಹೊಂದಿದ್ದಾರೆ ಎಂದು ತಿಳಿಸಿದರು.
ಗುಂಡ್ಲುಪೇಟೆ ಶಾಸಕರಾದ ಎಸ್. ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿ ಸರ್ಕಾರ ಅಧಿಕಾರಿಕ್ಕೆ ಬಂದ ಕಡಿಮೆ ಸಮಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ನುಡಿದಂತೆ ನಡೆದಿದೆ. ಜಿಲ್ಲೆಯ ಅಭಿವೃದ್ದಿಗೆ ಸರ್ಕಾರ ಸಾಕಷ್ಟು ನೀಡಿದೆ. ಜಿಲ್ಲೆಯ ಪ್ರಗತಿಗೆ ಎಚ್.ಎಸ್. ಮಹದೇವಪ್ರಸಾದ್ ಅವರು ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಎಂದರು.
ಶಾಸಕರಾದ ಎಂ.ಆರ್. ಮಂಜುನಾಥ್, ಅನಿಲ್ ಚಿಕ್ಕಮಾದು, ಡಾ. ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಕಾಡ ಅಧ್ಯಕ್ಷರಾದ ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರ್ ನಾಥ್, ಮೈಸೂರು ನಗರಾಭಿವೃಧಿ ಪ್ರಾಧಿಕಾರದ ಅಧ್ಯಕ್ಷರಾದ ಮರಿಗೌಡ, ನಗರಸಭೆ ಸದಸ್ಯರಾದ ಸಿ.ಜಿ. ಚಂದ್ರಶೇಖರ್, ಮಾಜಿ ಸಂಸದರಾದ ಶಿವಣ್ಣ, ಮಾಜಿ ಸಚಿವರಾದ ಬಿ. ಸೋಮಶೇಖರ್, ಮಾಜಿ ಶಾಸಕರಾದ ಆರ್. ನರೇಂದ್ರ, ಎಸ್. ಜಯಣ್ಣ. ಜಿ.ಎನ್. ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ