ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ದೊಡ್ಡಬಳ್ಳಾಪುರ:ತಾಲ್ಲೂಕಿನ,ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಭಾರತ ಸರ್ಕಾರದ ನಿರ್ದೇಶನದ ಮೇರೆಗೆ ವಿಜ್ಞಾನಿಗಳ ನಡೆ ರೈತರ ಕಡೆ ಎಂಬ ದೈಯೋದ್ದೇಶದೊಂದಿಗೆ ಮೇ 26 ರಿಂದ ಜೂನ್ 12, 2025 ರವರೆಗೆ ದೇಶಾದ್ಯಾಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ 2 ನೇ ದಿನವಾದ 30,05,2025 ರಂದು ಕೊಡಿಗೇಹಳ್ಳಿ ಗ್ರಾಮಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೃ.ವಿ.ವಿ., ಬೆಂಗಳೂರು, ವಿಸ್ತರಣಾ ನಿರ್ದೇಶಕರಾದ ಡಾ. ವೈ.ಎನ್. ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ರೈತರನ್ನು ಉದ್ದೇಶಿಸಿ ಮಾತನಾಡಿ ರೈತರು ಬೆಳೆ ಪ್ರಾರಂಭ ಮಾಡುವ ಮುನ್ನ ಮಣ್ಣು ಪರೀಕ್ಷೆ ಮಾಡಿಸಿ, ಪರೀಕ್ಷೆ ಫಲಿತಾಂಶದ ಮೇಲೆ ಪೋಷಕಾಂಶಗಳನ್ನು ನೀಡುವುದು, ರಾಗಿ ಬೆಳೆಯುವ ರೈತರು ಪೊಟ್ಯಾಶ್ ಗೊಬ್ಬರ ನೀಡದೆ ಕೇವಲ ಡಿ.ಎ.ಪಿ. ಮಾತ್ರ ಬಳಕೆ ಮಾಡುತ್ತಿರುವುದರಿಂದ ರಾಗಿ ಮತ್ತು ಇತರೆ ಬೆಳೆಗಳಲ್ಲಿ ಇಳುವರಿ ಕಡಿಮೆಯಾಗುತ್ತಿದೆ. ಈ ಅಭಿಯಾನದಲ್ಲಿ ವಿಜ್ಞಾನಿಗಳೇ ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ರೈತರಿಗೆ ವೈಜ್ಞಾನಿಕ ಬೇಸಾಯ ಕ್ರಮಗಳ ಮಾಹಿತಿಯನ್ನು ನೀಡಿ ಅವಶ್ಯಕತೆಯುಳ್ಳ ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳುತ್ತಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ವಿವಿಧ ಬೆಳೆಗಳಲ್ಲಿ ಉತ್ಪಾದನೆ ಮತ್ತು ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.

ಡಾ. ಹನುಮಂತರಾಯ ಬಿ.ಜಿ., ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು ಕೆಲವು ವೈಜ್ಞಾನಿಕ ತಂತ್ರಜ್ಞಾನಗಳಾದ ಬೇವಿನ ಸೋಪು, ಹೊಂಗೆ ಸೋಪು, ಟ್ರೈಕೋಡರ್ಮಾ ಇನ್ನಿತರೆ ಜೈವಿಕ ಪೀಡೆನಾಶಕಗಳನ್ನು ಬಳಸುವುದರ ಬಗ್ಗೆ ಮಾಹಿತಿ ನೀಡಿದರು. ಡಾ. ವೀರನಾಗಪ್ಪ ಪಿ., ವಿಜ್ಞಾನಿ (ಮಣ್ಣು ವಿಜ್ಞಾನ) ಇವರು ಈ ತಂಡದ ಮುಖ್ಯಸ್ಥರಾಗಿ ಕಾರ್ಯಕ್ರಮದ ಉಸ್ತುವಾರಿ ವಹಿಸಿ, ಮಣ್ಣು ಪರೀಕ್ಷೆ, ವಿವಿಧ ಬೆಳೆಗಳಿಗೆ ಶಿಫಾರಿತ ರಸಗೊಬ್ಬರಗಳು, ಸೂಕ್ಷ್ಮ ಪೋಷಕಾಂಶಗಳು ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಶ್ರೀಮತಿ ಸೌಮ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿವಿಧ ವಿಜ್ಞಾನಿಗಳನ್ನೊಳಗೊಂಡ ಮೂರು ತಂಡಗಳು ಪ್ರತ್ಯೇಕವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಡಿಗೇಹಳ್ಳಿ, ಅರಳುಮಲ್ಲಿಗೆ, ಕೋಳೂರು, ಸಾಸಲು, ಆರೂಡಿ, ಬನವತಿ, ತೂಬಗೆರೆ ಮತ್ತು ಮೆಳೇಕೋಟೆ ಗ್ರಾಮ ಪಂಚಾಯಿತಿಗಳಲ್ಲಿ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಹಮ್ಮಿಕೊಳ್ಳಬೇಕಾದ ಕೃಷಿ ಚಟುವಟಿಕೆಗಳ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರೈತ ಸಮುದಾಯ ಹಾಗು ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿಗಳು ಸಿಬ್ಬಂದಿ ವರ್ಗ ಹಾಜರಿದ್ದರು.